ಬಯಲ ಬೇಲಿಯ ದಾಟಿ ಮಲ್ಲಿಗೆಯ ಕಂಪು ಮನದ ಬೇಲಿಯ ದಾಟಿತು ಮಂದಾರದ ನುಣುಪು, ಬದುಕ ಹಾಡು ಮಲ್ಲಿಗೆ,ಬಯಕೆ ಹಾಡು ಮಂದಾರ!!!
Friday, August 25, 2017
ನಮ್ಮ ಗಣಪ ಗೌರಿಯರು ಮಣ್ಣಿಂದಲೆ ಬಂದು ಮಣ್ಣಲ್ಲೇ ಬೆರೆತು
Tuesday, August 22, 2017
ಅಪ್ಪ ಹೇಳಿದ ನಿಯಮಗಳು
೧) ಇವಳ ಗಂಡ(ಸಧ್ಯ ಬರಲಾರ , ಆರು ದಿನದ ಚೀನಾ ಪ್ರವಾಸ)
೨)ನನ್ನ ಹೆಂಡತಿ ( ಇದು ದೊಡ್ಡ ಸಮಸ್ಯೆ)
೩)ಕೆಲಸ-( ಕೊಲೆ ಕೇಸಿನಲ್ಲಿ ಸಿಕ್ಕಿ ಬಿದ್ದರೆ ಖಂಡಿತಾ ಉಳಿಯುವುದಿಲ್ಲ)
ತಕ್ಷಣಕ್ಕೆ ಈ ವಿಷಯ ಯಾರಲ್ಲಿ ಹೇಳಲಿ? ಯಾರು ನಂಬಿಗಸ್ಥರು ಅನ್ನುವುದು ನನಗೆ ತೋಚುತ್ತಿರಲಿಲ್ಲ, ನನ್ನ ಆತ್ಮ ಬಲವೆಲ್ಲ ಪಣಕ್ಕಿಟ್ಟು ಧೈರ್ಯ ತಂದುಕೊಂಡೆ, ಈಗ ಹೆದರಿದರೆ ಕೆಲಸವಾಗದು,ಅಲ್ಲಿಯೇ ತಡಕಾಡಿದೆ, ಎದ್ದು ಗೋಡೆಯ ಮೇಲೆ ಕೈಯಾಡಿಸುತ್ತಾ ನಾಲ್ಕು ಹೆಜ್ಜೆ ನಡೆದೇ. ದೀಪದ ಸ್ವಿಚ್ಚು ಕೈಗೆ ತಗಲಿತು , ಒಂದೊಂದಾಗಿ ಹಾಕುತ್ತ ಬಂದೆ ಮೂರನೆಯದ್ದು ಹಾಲಿನದ್ದು ಹೊತ್ತಿಕೊಂಡಿತು, ಬೆಳಕು ಕಣ್ಣು ಕುಕ್ಕುತ್ತಿತ್ತು, ಅವಳ ದೇಹ ಎತ್ತಲಾಗದ ಭಾರವಿತ್ತು, ಪ್ರಯತ್ನಿಸಲಿಲ್ಲ, ಕೈ ಉಗುರುಗಳನ್ನ ನೋಡಿದೆ, ಒಹ್ ಒಂದೇ ಗಂಟೆಯಾದ್ದರಿಂದ ಜೀವಂತ ಇದ್ದಂತೆಯೇ ಅನಿಸುತ್ತಿದ್ದವು,ಪಕ್ಕದಲ್ಲೇ ಕೂತು ಯೋಚಿಸತೊಡಗಿದೆ
ಸ್ಯಾಮುಯೆಲ್ - ಹೇಳಬಹುದು, ಒಳ್ಳೆಯವ , ಆದರೆ ನಂಬಿಕೆ ಇಲ್ಲ
ದೀಪಾ- ಸೀದಾ ಮನೆಗೆ ವಿಷಯ ತಲುಪುವುದು
ಮನೋಹರ- ಇಂತಹ ವಿಷಯದಲ್ಲೆಲ್ಲ ಹೈ ಇಂಪ್ಲ್ಯೂಯೆನ್ಸ್ ಮಾಡಿಸಬಹುದು, ಆದರೆ ಅವನಿಗೆ ನನ್ನವಳ ಮೇಲೆ ಅತಿಯಾದ ಆದರವಿದೆ , ಇದು ಅಪಾಯ, ಕೈ ಬಿಟ್ಟರು ಬಿಟ್ಟನೇ
ಹೆಂಡತಿ- ಹೋದ ಸಾರಿ ದೀಪಾಳ ಮನೆಯಲ್ಲಿ ಅವಳ ಗಂಡ ಮೋಸ ಮಾಡಿದ್ದನ್ನು ಕಂಡು ದಿಪಾಳಿಗೂ ಹೇಳದೆ ಅವನನ್ನು ಕರೆದು ಬೆದರಿಕೆ ಹಾಕಿ ಸರಿ ದಾರಿಗೆ ತಂದದ್ದನ್ನು ಕಂಡಿದ್ದೇನೆ ತಾನು, ಈಗ ತಾನು ಅದೇ ದಾರಿಯಲ್ಲಿದ್ದೆಯೆಂದರೆ ಏನು ಮಾಡುವಳು? ತಿಳಿಯದು, ಸಣ್ಣದಾಗಿ ತಲೆ ಸಿಡಿಯಲಾರಂಭಿಸಿತು, ಕಣ್ಣು ಕತ್ತಲೆಗಟ್ಟಿತು ಅಷ್ಟೇ!
ಎಚ್ಚರಾದಾಗ ಅವಳು ಎದುರು ಕೂತಿದ್ದಳು , ಕೈ ಚಾಚಿದೆ, ಮೃದುವಾಗಿ ಬೆರಳೊಡನೆ ಆಟವಾಡುತ್ತಾ ಸವರಿದಳು, ಮೈ ಝುಮ್ಮೆನ್ನುವ ಅನುಭವ, ಹಿತವಾಗಿ ಮುಗುಳ್ನಕ್ಕಳು, ನಾನು ನಂಬದವನಂತೆ ಪದೇ ಪದೇ ಕಣ್ಣುಜ್ಜಿದೆ, ಸೋಫಾದ ಕೆಳಗೆ ನೋಡಿದೆ, ಅಲ್ಲಿ ದೇಹ ಬಿದ್ದಿದ್ದ ಯಾವ ಗುರುತು ಇರಲಿಲ್ಲ,"ನಾನು ಭೂತವಾಗಿದ್ದೀನಾ ಅಂತ ಪರೀಕ್ಷಿಸುತ್ತಿದ್ದೀಯಾ?" ಅವಳ ತಣ್ಣನೆಯ ಹರಿತ ದನಿ ತೇಲಿಬಂತು, ಬಲವಂತದ ನಗು ನಕ್ಕೆ, "ಹೇಳು, ನನ್ನ ಯಾಕೆ ಬಿಟ್ಟು ಹೋದೆ?" "ಅ ... ಅ ... ಅದೂ , ಪ್ಲೀಸ್ ಈಗ್ಯಾಕೆ ಹಿಂದಿನ ಮಾತು , ಬಿಟ್ಟು ಬಿಡು, ಈಗ ನನ್ನ ಬರಹೇಳಿದ್ಯಾಕೆ ಮೊದಲು ಹೇಳು , ಪ್ಲೀಸ್" ನಾನು ಅಂಗಲಾಚಿದೆ, "ಇಲ್ಲ, ಕಾರಣ ಹೇಳಲೇಬೇಕು, ನೀನು ಕಾರಣ ಹೇಳಿದರೆ ನಾನು ನಿನಗೆ ಅತಿ ಮುಖ್ಯ ವಿಷಯ ಹೇಳೋದು" ಅವಳು ತುಂಟತನದಲ್ಲಿ(ಬಹುಶಃ ಅದು ನನ್ನ ಕಲ್ಪನೆಯೇ? ನನಗರ್ಥವಾಗಲಿಲ್ಲ)ಅವಳ ಕೆಳ ತುಟಿ ಕಚ್ಚಿದಳು, ನಾನು ಸಲ್ಪ ಹಗುರಾದೆ.
"ನಿಜ ಹೇಳಲಾ,ಸುಳ್ಳ?" ಓ , ಇದು ನಾವಿಬ್ಬರು ಯಾವಾಗಲೂ ಆಡುತ್ತಿದ್ದ ಆಟ , ತುಂಬಾ ಸಾರಿ ಅವಳು ಪರವಾಗಿಲ್ಲ ಸುಳ್ಳೇ ಹೇಳು ಅಂತಿದ್ದಳು , ನನಗೆ ಹೂ ಮಲೆಯಲ್ಲಿ ಕಳೆದ ರಾತ್ರಿ ನೆನಪಾಗಿ ಮೈ ಬಿಸಿಯಾಯ್ತು,
ಅವತ್ತು ಪೂರ್ಣ ಬೆಳದಿಂಗಳ ದಿನ , ಇವತ್ತು ರಾತ್ರಿ ಬರ್ತಿಯಾ? ಅಂತ ಅವಳನ್ನ ಕೇಳಿದ್ದೆ ಎಲ್ಲಿಗೆ ಅಂತ ತಡವರಿಸಿದ್ದಳು ಹೂ ಮಲೆಯ ತುದಿಗೆ ಹೋಗೋಣ, ಇವತ್ತು ಹುಣ್ಣಿಮೆ ಅಂದಾಗ ಭಯವಾಗುತ್ತೆ ಅಂದಿದ್ದಳು, ನಾನು ಒತ್ತಾಯಿಸಿದಾಗ ಒಪ್ಪಿ ನಾನು ಹೇಳಿದ ಜಾಗಕ್ಕೆ ಬಂದಿದ್ದಳು, ನಂತರ ಒಂದು ಗಂಟೆ ಉಸಿರು ಬಿಗಿ ಹಿಡಿದು ಹತ್ತಿದ್ದೆವು, ಹಾಲು ಮಂಟಪ, ಅದರ ತುದಿಯ ಮೇಲೆ ಸೂರ್ಯನ ಬೆಳಕು ಅಥವಾ ಚಂದ್ರನ ಬೆಳಕು ಯಾವುದು ಬಿದ್ದರು ಇಡೀ ಮಂಟಪದಲ್ಲಿ ಬೆಳಕು ಕೋರೈಸುತ್ತಿತ್ತು, ಹಾಗೆಂದೇ ಅದಕ್ಕೆ ಹಾಲು ಮಂಟಪ ಅನ್ನುತ್ತಿದ್ದರು ಯಾವ ದೊರೆಯೊ ಯಾವ ಪ್ರೇಯಸಿಗೋ ಕಟ್ಟಿದ ಕಥೆ ಊರ ತುಂಬೆಲ್ಲ ಹಾಡಾಗಿ ಕಥೆಯಾಗಿ ಹರಿದಾಡಿಕೊಂಡಿತ್ತು , ನನ್ನ ಅತಿ ರಹಸ್ಯಗಳನ್ನೆಲ್ಲ ಬಚ್ಚಿಟ್ಟುಕೊಂಡ ಈ ಮಂಟಪ ನನಗೆ ಬಹಳವೇ ಪ್ರಿಯವಾದ್ದು, ಅವತ್ತು ಕುಳಿತು ಬೆದರಿಕೆಯ ಕಣ್ಣಲ್ಲಿ ಬೆಳಗು ಹರಿವುದರೊಳಗೆ ನನಗೆ ನಮ್ಮನೆಯ ಹಿತ್ತಲಿಗೆ ಬಿಟ್ಟು ಬಿಡು ಅಂದಾಗ ನನಗೆ ಆ ಭಯ ತಮಾಷೆಯಂತೆ ಕಾಣಿಸಿತ್ತು ಮತ್ತೆ ಅವಳನ್ನು ಕೆಣಕಿದ್ದೆ ಸತಾಯಿಸಿದ್ದೆ ಅವಳು ಸತ್ಯ ಹೇಳು, ನಿನಗೆ ನಾನೇಕಿಷ್ಟ ಅಂದಾಗ ಸುಳ್ಳು ಹೇಳಲಾ ಸತ್ಯ ಹೇಳಲಾ ಅಂತ ಕೇಳಿದ್ದೆ, ಅವಳು ಮುಗ್ಧೆಯಾಗಿ ಸತ್ಯ ಹೇಳು ಅಥವಾ ನಿನಗಿಷ್ಟ ಆಗಿದ್ರೆ ಸುಳ್ಳು ಹೇಳು ಅಂದಾಗ ನನಗೆ ಈ ಕ್ಷಣಕ್ಕೆ ನೀನಿಷ್ಟ ಅಂದು ಸುಮ್ಮನಾಗಿದ್ದೆ, ಅವಳೂ ಹಠಕ್ಕೆ ಬಿದ್ದವಳಂತೆ ನನಗೆ ನೀನಿಷ್ಟವೇ ಇಲ್ಲ ಅಂದಿದ್ದಳು ಬಹುಶಃ ಅವಳ ಕಾಣುಗಳಲ್ಲಿದ್ದ ನೀರು ಪಸೆ ನನ್ನ ಕೈಗಂಟಿತ್ತು, ಅದನ್ನೊರೆಸುತ್ತ್ತ ಹೋದ ಬೆರಳಿಗೆ ಅವಳ ಮೂಗಿನ ನತ್ತು ಹಣೆಯ ಬೆವರು ಅದುರುತ್ತಿದ್ದ ತುಟಿಗಳೂ ಏರಿಳಿಯುತ್ತಿದ್ದ ಎದೆಯ ಲಯತಪ್ಪಿದ ಹಾಡೂ ಕೇಳಿಸಿತ್ತು, ನಾನು ಉನ್ಮತ್ತನಾಗಿದ್ದೆ ಅವಳ ದೇಹದ ತುಂಬೆಲ್ಲ ಅಂತಿದ್ದ ಅದಾವುದೋ ಮಾಯಕದ ಸುವಾಸನೆ ನನ್ನ ಕಟ್ಟಿ ಹಾಕಿತ್ತು, ಅವಳು ಅವತ್ತು ಬೆಳದಿಂಗಳಿನಲ್ಲಿ ಕನವರಿಸಿದ್ದಳು"ನಿನ್ನ ಬಿಟ್ಟು ಬದುಕಲಾರೆ, ಈ ಸುಖದಾಣೆ ಸತ್ಯ"
"ಮತ್ತೆ ನನ್ನ ಹಾಲು ಮಂಟಪಕ್ಕೆ ಕರಿಬೇಡ"ಅವಳ ದನಿ ಎಚ್ಚರಿಸಿತು, ತಬ್ಬಿಬ್ಬಾಗಿ ನೋಡಿದೆ, ಇವಳು ನಿಜವಾಗಲೂ ನನ್ನ ಎದುರಿಗಿದ್ದಾಳೆ ಅನ್ನುವುದು ರೋಮಾಂಚನವನ್ನು ಭಯವನ್ನು ಒಟ್ಟಿಗೆ ತರುತ್ತಿತ್ತು, ನನ್ನ ಮನಸ್ಸನ್ನು ಓದುತ್ತಿದ್ದಾಳೆ ಅನ್ನುವುದು ಭಯವನ್ನು ಇನ್ನು ಹೆಚ್ಚಿಸಿತ್ತು, "ನೀನ್ಯಾವತ್ತು ಅಷ್ಟು ಕ್ರೂರಿಯಾಗಿ ನನ್ನ ಕಣ್ಣಿಗೆ ಕಾಣಲೇ ಇಲ್ಲ, ಅದೆಷ್ಟೋ ಸಾರಿ ನಿನ್ನ ಕ್ಷಮಿಸಿದ್ದೀನಿ ಅನ್ನೋ ಭ್ರಮೆಯಲ್ಲಿ ಬದುಕೋಕೆ ಪ್ರಯತ್ನಿಸಿದೆ, ನೀನು ಸಿಕ್ಕಿದ ಜಾಗಗಳನ್ನೆಲ್ಲ ಒಂದೊಂದಾಗಿ ನಿರಾಕರಿಸುತ್ತಾ ನಿರಾಕರಿಸುತ್ತ.... ಈಗ ಇಡೀ ಜಗತ್ತೇ ಬೇಡ ಅನಿಸಿಬಿಟ್ಟಿದೆ," ಅವಳು ಮಾತಾಡುತ್ತಾ ಹೋದಳು"ಅಷ್ಟಕ್ಕೂ ಯಾರನ್ನಾದರೂ ಈ ತರಹ ನಮ್ಮೊಳಗೇ ಬಿಟ್ಟು ಕೊಳ್ಳುವ ಅವಶ್ಯಕತೆ ಏನಿರುತ್ತೆ? ನನಗೆ ಉತ್ತರ ಸಿಕ್ಕಿಲ್ಲ, ನೀನವತ್ತು ಹಿಡಿದ ಕೈ ಕೊಡವಿ ಬಸ್ಸು ಹತ್ತಿದೆ ಅಲ್ಲ ಅವತ್ತು ನನ್ನ ಮನಸಿಗೆ ಖಾತ್ರಿ ಆಗಿತ್ತು ತಿರುಗಿ ಬರಲಾರೆ ಅಂತ, ಆದರೂ ನೋಡು ಆಗದ್ದನ್ನ ಆಗೇ ಬಿಡುತ್ತೆ ಅಂತ ಬಯಸುತ್ತಾ ಅದಕ್ಕಾಗಿ ಭ್ರಮಿಸುತ್ತಾ ಹುಡುಕಾಡುತ್ತಾ ಮನಸ್ಸು ತನ್ನ ತಪ್ಪಿದ ಲಯ ಕಂಡುಕೊಳ್ಳೋಕೆ ಪ್ರಯತ್ನಿಸುತ್ತೆ, ನೀನು ಹೋದ ಮೇಲೆಯೇ ನಾನು ನಿನ್ನ ಬಗ್ಗೆ ಬಹಳಷ್ಟು ತಿಳಿದುಕೊಂಡೆ, ನೀನು ನನ್ನಿoದ ಮುಚ್ಚಿಟ್ಟ ಎಲ್ಲ ವಿಷಯಗಳು ನನಗೆ ಗೊತ್ತಾಗುತ್ತಾ ಹೋದವು, ನೀನೊಂದು ಭ್ರಮೆಯಲ್ಲಿ ನನ್ನ ಬದುಕಲು ಬಿಟ್ಟಿದ್ದೆ, ನಾನು ಅದನ್ನೇ ಬಹಳ ಕಾಲ ಜೀವಿಸಿದ್ದೆ ಅನ್ನುವ ಸತ್ಯ ನನಗೆ ಅರಿವಾಗುತ್ತಾ ಹೋಯಿತು, ಆದರೆ ಈಗ ಬಂದದ್ದು ಮಾತ್ರ ನಿನ್ನ ಬಾಯಿಂದ ಕಾರಣ ಕೇಳಲು, ಹೇಳು , ಅದು ಯಾವ ಕಾರಣ ನಿನ್ನ ಇಲ್ಲಿಗೆ ನನ್ನಿಂದ ದೂರ ಎಳೆದು ತಂದದ್ದು" ಅವಳ ದ್ವನಿ ತೀವ್ರ ವಾಗುತ್ತಾ ಸಾಗಿತ್ತು , ನಾನು ಮಾತಾಡಲೇ ಬೇಕಿತ್ತು "ನಿನ್ನ ಬಿಟ್ಟು ಬರಲು ಅಂಥಾ ಕಾರಣ ಏನಿರಲಿಲ್ಲ, ಆದರೂ ನಾನು ಬಹುಶಃ ಬಂಧನಗಳಿಗೆ ಹೆದರಿದ್ದೆ, ಅಥವಾ ಪಲಾಯನ ನನ್ನ ರಕ್ತದಲ್ಲಿಯೇ ಇದೆ ಅ೦ದರು ಸರಿಯಾದೀತು, ನನಗೆ ಇನ್ಯಾವುದೋ ಕಾಣದ ಸೆಳೆತದ ಹುಡುಕಾಟ ಇತ್ತು ಅನಿಸುತ್ತೆ" ನನ್ನ ಮಾತು ಮುಗಿವ ಮೊದಲೇ ಜೋರಾಗಿ ನಕ್ಕಳು ಅವಳು, ತೀರಾ ಅಸಹಜ ನಗು, ನನ್ನ ಹೃದಯ ಬಡಿತ ಮತ್ತೆ ಏರಿತು, ಭಯದಲ್ಲಿ, ಭಯವನ್ನು ಮುಚ್ಚಿಡಲು ಯತ್ನಿಸುತ್ತಾ ಅವಳನ್ನೇ ನೋಡಿದೆ"ಹುಚ್ಚಾ , ಆತ್ಮಸಾಕ್ಷಿ ಸತ್ತು ಹೋಗಿದೆ ನಿಂಗೆ ಏಳೋ ಎದ್ದೇಳು, ನಿನಗೆ ಪಲಾಯನ ವಾದವಲ್ಲ, ಹತ್ತಿದ್ದು ದೇಹಗಳ ಸುವಾಸನೆಯ ಮತ್ತು, ನಿನ್ನೊಳಗಿನ ಮೃಗ ಕೇವಲ ದೇಹದ ಸಾಂಗತ್ಯ ಅಷ್ಟೇ ಬಯಸಿದ್ದು, ಅದಕ್ಕೆ ಬೇರೆಯ ಹೆಸರಿಟ್ಟು ವಂಚಿಸುತ್ತಾ ಬಂದವ ನೀನು" ಬೆ೦ಕಿಯ ಧಾರೆ ದನಿಯಲ್ಲಿ,
ನಾನು ನಡುಗಿದೆ , "ನಿನೊಂದೆ ಅಲ್ಲ ನಿನ್ನಂಥ ಎಲ್ಲರಿಗು ಇದೊಂದೇ ದಾರಿ ಬದುಕಿನ ಸತ್ಯಗಳನ್ನ ಎದುರಿಸಲಾಗದೆ ಓಡುತ್ತಾ ಓಡುತ್ತಾ ದಾರಿಗಳೇ ಇಲ್ಲದ ಕಡೆ ತಲುಪಿಬಿಡುತ್ತೀರಿ, ನೀನು ನನ್ನಿಂದ ಕಿತ್ತುಕೊಂಡಿದ್ದು ಏನು ಗೊತ್ತಾ, ಪಾಪ ಪ್ರಜ್ಞೆ, ನಾನು ಸತ್ತು ಹುಟ್ಟಿದೆ, ಬಹಳ ಸಲ, ಇನ್ನೀಗ ನಿನ್ನ ಸರದಿ" ನಾನು ಬಾಯ್ತೆರೆವ ಮೊದಲೇ ಅವಳು ನಕ್ಕಳು "ನೀನು ಮದುವೆಯಾಗಿದ್ದೀಯಲ್ಲ, ಸುಖ ಸಿಕ್ಕಿತಾ, ನೀನು ಹುಡುಕುತ್ತಿದ್ದ ಆ ನೆಮ್ಮದಿ, ನನ್ನ ಬಿಟ್ಟು ಇನ್ನೊಂದು ದೇಹದಲ್ಲಿ ನೀನು ಅರಸುತ್ತಿದ್ದ ಆ ನೆಮ್ಮದಿ ಕ್ಷಣವಾದರೂ ಸಿಕ್ಕಿತಾ? ಇರುವ ಇಷ್ಟು ಸಣ್ಣ ಜೀವನವನ್ನ ಹೊಂದಿಕೆ ಇಲ್ಲದೆ ಅಳುತ್ತ ಕಳೆಯುತ್ತೀದ್ದಿ , ನಿನಗೆ ನಂಬಿಕೆ ಇಲ್ಲ ಯಾವುದರಲ್ಲೂ, ಸ್ವತಃ ನಿನ್ನಲ್ಲೂ ,ಅದಕ್ಕೆ ಬರಿ ಭ್ರಮೆಯಾದ ನಾನು ನಿನಗೆ ಕಾಣುತ್ತಿರುವುದು" ಎಂದು ನಕ್ಕಳು, ನಾನು ಅವಳನ್ನೇ ನಂಬಲಾರದವನಂತೆ ನೋಡಿದೆ, ಕೈ ಚಾಚಿದಳು , ನಾನು ತಪ್ಪಿಸಿಕೊಳ್ಳಲೆತ್ನಿಸಿ ಓದಿದೆ ಓಡಿದೆ , ಕೈಗಳು ಕಬಂಧವಾಗಿ ನನ್ನ ಹಿಡಿಯುತ್ತಲೇ ಹಿಂದೆ ಬಂದಿತು , ಅಷ್ಟೊತ್ತಿಗೆ ನಾನು ಟೆರ್ರೇಸಿನ ಮೇಲಿದ್ದೆ , ಕೆಳಗೆ ಹಾರಿದ್ದಷ್ಟೇ ಗೊತ್ತು, ಕಣ್ಣು ಮತ್ತೆ ಕತ್ತಲೆಗಟ್ಟಿತು
ಎಚ್ಚರಾದಾಗ ಎದುರಲ್ಲಿ ಅವಳ ದೇಹ ಇರಲಿಲ್ಲ ಬಹುಶಃ ನಾನು ಯಾವ ಅವಸ್ಥೆಯಲ್ಲಿ ಕನಸು ಕಂಡೆನೋ , ನನಗೆ ಸತ್ಯ ಸುಳ್ಳುಗಳ ವ್ಯತ್ಯಾಸ ತಿಳಿಯಲಿಲ್ಲ, ಮೊಬೈಲ್ ಆನ್ ಮಾಡಿದೆ ಮನೆಯಿಂದ ಬಂಡ ಬಹಳಷ್ಟು ಕಾಲ್ಗಳು, ಇಲ್ಲ ಇವತ್ತು ಸುಳ್ಳು ಹೇಳಲಾರೆ, ಹೆಂಡತಿಗೆ ಫೋನಾಯಿಸಿದೆ " ಸುಜೀ , " "ರೀ ಏನ್ರೀ ಎಲ್ಲಿ ಇದ್ದೀರಾ. ಬೇಗ ಬನ್ನಿ " ಇಲ್ಲೆಲ್ಲೋ ಸಿಕ್ಕಾಕಿಕೊಂಡಿದ್ದೀನಿ ಈಗ ಸಮಯ ಎಷ್ಟು ಹೇಳು" "ಅಯ್ಯೋ ಕೈಲಿ ಮೊಬೈಲ್ ಇಲ್ವಾ, ಎಲ್ಲಿದ್ದೀರಾ ಹೇಳಿ, ನಾನು ವಿಳಾಸ ಕೊಟ್ಟೆ, ನಂತರ ಒಳ ಹೋಗಿ ನೀರು ಕುಡಿದು ಸೋಫಾದ ಮೇಲೆ ಕಾಲುಚಾಚಿದೆ , ಅವಳ ಬಿಸಿಯುಸಿರು ನನ್ನ ಎದೆಗೆ ತಾಕುತ್ತಿತ್ತು ಸಣ್ಣದಾದ ಮುಗುಳ್ನಗುವು, ಹೂ ಮಳೆಯ ಬಳದಿಂಗಳಲ್ಲಿ ನಾನು ಅವಳ ಕೈ ಹಿಡಿದ ಕ್ಷಣಗಳೆಲ್ಲ ಕಣ್ಣೆದುರೇ ನಡೆಯಲಾರಂಭಿಸಿದವು , ಮನೆಯ ಬಾಗಿಲು ತಟ್ಟಿದ ಶಬ್ದ , ನಂತರ ತೆರೆದ ಶಬ್ದ , ನಾನು ದಿಗ್ಭ್ರಮೆ ಹಿಡಿದವನಂತೆ ನೋಡುತ್ತಿದ್ದೆ,
ನನ್ನ ಹೆಂಡತಿಯನ್ನು ಒಳಗೆ ಬರ ಮಾಡುತ್ತಿದ್ದವಳು ಅವಳು, ಹಿಂದೆಯೇ ದೀಪಾ , ಸ್ಯಾಮ್ಯುಯೆಲ್ ಎಲ್ಲರು ಒಳ ಬಂದರು,
ಅವಳು ನನ್ನ ಕಡೆ ಕೈ ತೋರಿಸಿ ಗಾಭರಿ ಇಂದ ಏನೋ ಹೇಳುತ್ತಿದ್ದಳು, ನನ್ನ ಹೆಂಡತಿ ಚೀರಿದ್ದು ಕೇಳಿಸಿತು, ಜತೆಗೆ ಜೋರಾಗಿ ಅಳುವ ಶಬ್ದವೂ , ನಾನು ಅತ್ತಲೂ ಹೋಗಲಾಗದೆ ಅವಳನ್ನು ಬಿಡಲಾಗದೆ ಹೂಮಾಲೆಯ ಹಾದಿಯಲ್ಲಿ ಅಲೆಯುತ್ತಿದ್ದ ಭ್ರಮೆಗೆ ಸಿಕ್ಕಿದೆ,
ಸತ್ತಿದ್ದು ಯಾರು, ನನಗೆ ನಿಜವಾಗಲೂ ತಿಳಿಯುತ್ತಿಲ್ಲ
ಹೃದಯದ ಭಾಷೆ
Saturday, August 19, 2017
ಅವನಿಗೆ
ಆಧುನಿಕ ಮನುಷ್ಯರಲ್ಲಿ ಇತರರ ನೋವನ್ನು, ಅವಮಾನವನ್ನು ನೋಡಿ ಸಂತೋಷಪಡುವ ಪ್ರವೃತ್ತಿ ಹೆಚ್ಚುತ್ತಿದೆ_ಯೆಂದು ಆತಂಕ ವ್ಯಕ್ತಪಡಿಸಿದ್ದಾನೆ.
ಎಸ್ ದಿವಾಕರ್ ಅವರು ಅನುವಾದಿಸಿದ ಸಾಲುಗಳನ್ನು ಓದುತ್ತ ತಟ್ಟನೆ ನಿನ್ನ ನೆನಪಾಯ್ತು. ನೀನು ಕಳಿಸಿದ ಕೊನೆಯ ಮೆಸೇಜು, "ಸಾರಿ ದಟ್ ವಾಸ್ ವೆರಿ unfortunate , sincerely sorry if I hurt you" ಜೊತೆಗೆ ನನ್ನ ಅವಮಾನಿಸಿ ಹೊರ ಕಳುಹಿಸಿದ ನಂತರ ನನ್ನ ಕಿವಿಗಪ್ಪಳಿಸಿದ ನಿನ್ನ ನಗುವು ಮತ್ತದರ ಹಿಂದೆ ನೀನು ದೊಡ್ಡ ಸಾಧನೆ ಮಾಡಿದವನಂತೆ ಹೇಳಿದ ವಾಕ್ಯಗಳು , ನಾನಾಗೆ ನಿನ್ನ ಬಾಗಿಲಿಗೆ ಯಾವತ್ತೂ ಬಂದಿರಲಿಲ್ಲ ನಾನು ಮನಸ್ಸು ಮಾಡಿದ್ದರೆ ಅವಷ್ಟು ಮೆಸೇಜುಗಳನ್ನ ನಿನ್ನ ಯೋಗ್ಯತೆಯನ್ನು ಇವತ್ತು ಬೀದಿಗೆಳೆಯಬಹುದು, ಅಥವಾ ಇನ್ನೇನೋ ಮಾಡಬಹುದು, ನೀನು ಮಾಡಿದ ಮೊಸವಿದೆಯಲ್ಲ ಅಂತೆಸಿಟಿ ಅನ್ನುವ ಅಂತೆಕಂತೆಗಳಲ್ಲಿ ನಿನ್ನ ನೀನು ಸುಳ್ಳಿಗೆ ಮಾರಿಕೊಂಡ ಅವನ್ಯಾರೋ ಎಳೆ ನಿಂಬೇಕಾಯಿಯ ಆಟಗಳನ್ನು ನಿನ್ನ ನಿಯತ್ತಿಗೆ ಬಲಿಕೊಟ್ಟ ನಿನ್ನ ಅಸಹಾಯಕತೆ, ರಕ್ತದಲ್ಲಿ ಅದ್ದಿದ ನಿನ್ನ ಆದರ್ಶಗಳು ಛೇ ಅಸಹ್ಯ ಹೇಸಿಗೆ ಗಬ್ಬು ಹೊಲಸನ್ನ ಬಿಟ್ಟು ಇನ್ಯಾವುದೇ ಪದವಿದ್ದರೂ ಅದನ್ನ ನಾನು ಬಳಸ ಬಯಸುವೆ , ನನ್ನ ಅಸಹಾಯಕ ಸ್ಥಿತಿಯನ್ನು ಬಳಸಿಕೊಂಡು ಆಡಿದ ಆಟವಿದೆಯಲ್ಲ, ಎಂಥ ಕೀಳು ಭಿಕ್ಷುಕ ಕೂಡ ಆ ಕೆಲಸ ಮಾಡಲಾರ. ನಿನಗೆ ನಿನ್ನ ಲ್ಯಾಂಡ್ಮಾರ್ಕ್ ಕೋರ್ಸು ಸುಳ್ಳನ್ನು authentic ಆಗಿ ಹೇಳುವುದನ್ನು ಕಲಿಸಿಕೊಟ್ಟಿದೆಯಷ್ಟೇ, ನಿನ್ನ ವೃತ್ತಿಯ ಮೂಲ ಸ್ವಭಾವವೇ ಹಾಗಿರುವಾಗ ಇಂತಹ ಘಟನೆಗಳು ಇನ್ನಷ್ಟು ಆ ವೃತ್ತಿಯ ಬಗ್ಯೆ ಅಸಹ್ಯವನ್ನೇ ಹುಟ್ಟು ಹಾಕುತ್ತದೆ ಅಷ್ಟೇ, ಇಂತಹ ದುರಾದೃಷ್ಟ ನಿನ್ನದು, ಯಾವತ್ತೂ ನಿನಗೆ ನನ್ನ ಬೆಲೆ ಅರಿವಾಗಲೇ ಇಲ್ಲ ಹಣದ ಮುಂದೆ, ನನ್ನ ಅದಮ್ಯ ನಂಬಿಕೆ ವಿಶ್ವಾಸಗಳನ್ನ ಮುರಿದ ನಿನ್ನ ಅದ್ಯಾವ ಹಾರೈಕೆ ಕಾಪಾಡುವುದು"ಅವಳ" ಆಶ್ರಯವು ಕಾಪಾಡಲಾರದು, ನೀನು ಅದೆಷ್ಟು ಸುಳ್ಳುಗಳ ಬಚ್ಚಿಟ್ಟಿದ್ದಿ, ಆಹಾ
ಪ್ರಖ್ಯಾತ ಮನೋವಿಶ್ಲೇಷಣಾ ತಜ್ಞ ಎರಿಕ್ ಪ್ರಾಮ್ ತನ್ನ *`ದಿ ಅನಾಟಮಿ ಆಫ್ ಹ್ಯೂಮನ್ ಡಿಸ್ಟ್ರಕ್ಟಿವ್ನೆಸ್'* ಎಂಬ ಗ್ರಂಥದಲ್ಲಿ ಬರೆದಿರುವಂತೆ _`ಇತರರನ್ನು ಹಂಗಿಸುವ, ಅವರ ಭಾವನೆಗಳ ಮೇಲೆ ಹಲ್ಲೆ ಮಾಡುವ ಮಾನಸಿಕ ಕ್ರೌರ್ಯವಿದೆಯಲ್ಲ, ಅದು ದೈಹಿಕ ಕ್ರೌರ್ಯಕ್ಕಿಂತ ಹೆಚ್ಚು ವ್ಯಾಪಕ. ಇಂಥ ಕ್ರೌರ್ಯ ಎಸಗುವವನು ಸ್ವತಃ ಸುರಕ್ಷಿತವಾಗಿರುತ್ತಾನೆ. ಯಾಕೆಂದರೆ ಅವನು ಉಪಯೋಗಿಸುವುದು ದೈಹಿಕ ಶಕ್ತಿಯನ್ನಲ್ಲ, `ಕೇವಲ' ಶಬ್ದಗಳನ್ನು ಮಾತ್ರ. ಆದರೆ ಮಾನಸಿಕ ಆಘಾತ ದೈಹಿಕ ಬಾಧೆಗಿಂತ ಹೆಚ್ಚು ಮಾರಕವಾಗಬಲ್ಲುದು... ಕೇವಲ ಒಂದು ಸೂಕ್ತ ಶಬ್ದದ ಮೂಲಕ ಅಥವಾ ಹಾವಭಾವದ ಮೂಲಕ ಇತರರಿಗೆ ಮುಜುಗರವುಂಟುಮಾಡುವ ಅಥವಾ ತೇಜೋವಧೆ ಮಾಡುವ `ಕಲಾವಿದ' ಯಾರಿಗೆ ಗೊತ್ತಿಲ್ಲ? ಈ ಬಗೆಯ ಸ್ಯಾಡಿಸಂ ಅನ್ನು ಇತರರ ಸಮ್ಮುಖದಲ್ಲಿ ಪ್ರಯೋಗಿಸಿದಾಗ ಅದು ಹೆಚ್ಚು ಪರಿಣಾಮಕಾರಿಯಾಗುತ್ತದೆ'._
ನೀನು ಮಾಡಿದ್ದು exactly ಇದನ್ನೇ , ಒಳ್ಳೆಯದಾಗಲಿ, ನಿನ್ನನ್ನ ಹರಿದು ಬಿಸಾಡುವುದು ಎಷ್ಟೋತ್ತಿನ ಕೆಲಸ, ಆದರೆ ನೀನು ಬದುಕಿರಬೇಕು, ಹೀಗೆ ನನ್ನ ಪಡೆಯಲಾರದೆ ಎಸಗಿದ ಅನ್ಯಾಯ ಅವಮಾನಗಳ ನೆರಳಿನಲ್ಲಿ, ಕೊನೆಗೆ ಮಾಡುವ ಪ್ರತಿ ಪೂಜೆ ಪ್ರತಿ ದಾನ ಪ್ರತಿ ಪ್ರಾರ್ಥನೆಯ ಹಿಂದೆಯೂ ನೀನು ಹೂತು ಹಾಕಿದ ನಿನ್ನ ಸುಳ್ಳು ಬೇಟೆಯಾಡುತ್ತದೆ, ಮುಂದೆ ಸಾಯುವ ಮುನ್ನವಾದರು ನಿನ್ನ ಕ್ಷಮೆಗಳ ಪಟ್ಟಿಯಲ್ಲಿ ನನ್ನದು ಮೊದಲಿರುತ್ತದೆ
ಬದುಕಿಕೊ ಹೋಗ್!😊
Thursday, August 17, 2017
ಮಧುಮಾಸ ಚಂದ್ರಮ
ಒಲವಿನ ಲೋಕಕೆ ನೀ ತಂದೆ ಪೂರ್ಣಿಮಾ....
ನಾನಿಲ್ಲೆ ಇದ್ದೇನೆ ಎಂದು ಒಮ್ಮೆ ತೋಳ್ ಚಾಚಿ ನೀನಪ್ಪಬಾರದೆ? ನನ್ನ ತಲೆ ನೇವರಿಸಿ ಒಮ್ಮೆ ನೀನಿರು ಜತೆಗೆ, ಈ ಪ್ರಯಾಣ ಸುಗಮ ಅನ್ನಬಾರದೆ? ಮಾತುಗಳನ್ನೆಲ್ಲ ಅದಾವ ತಿಜೋರಿಯಲ್ಲಿ ಬಚ್ಚಿಟ್ಟು ಕೀ ಕಳೆದು ಕೊಂಡೆ?ದೂರವಿದ್ದು ಹತ್ತಿರ ಇರುವ ಪರಿಪಾಠ (ಪಡಿಪಾಟಲು ಕೂಡ)ನಾನು ನೋಡಿದ್ದೇನೆ
ಹತ್ತಿರವಿದ್ದು ಅದೆಷ್ಟೋ ಮೈಲಿಗಳ ಅಂತರವನ್ನು ಅದೆಷ್ಟು ಸಲೀಸಾಗಿ ಸ್ಥಾಪಿಸಿದ್ದೀ ನೀನು?ನನಗೆ ಅಷ್ಟು ದೂರಾ ಹೊರಳಿ ನಡೆಯಲಾಗದು, ನೀರಿರದ ನದಿಯ ದಡದಲ್ಲಿ ನಿಂತ ಒಂಟಿ ನಾವೆಯಂತೆ ನಾನು ಕಾಯುತ್ತಲೇ ಇರುವೆ, ನಿನ್ನ ಆ ದಡಕ್ಕೆ ನನ್ನ ತಲುಪಿಸಲಿ ಅಂತ, ನಮ್ಮ ನಡುವಿನ ಅಂತರ ಕೊಚ್ಚಿ ಹೋಗುವ ಪ್ರೇಮ ಮಳೆಯೊಂದು ಬರಲಿ, ನಾನು ಕಾದು ಕಾದು ಸೋತಿದ್ದೇನೆ. ನಿನಗಾಗಿ, ನನ್ನ ಕ್ಷೀಣ ದನಿ ನಿನಗೆ ಈ ಬಾರಿಯಾದರೂ ಕೇಳಲಿ
ಒಮ್ಮೆ ಬಾರೋ ಒಮ್ಮೆ ಬಾರೋ
ಹೇಗೆ ನೀನಿದ್ದರೂ
ಒಮ್ಮೆ ಬಾರೋ ಒಮ್ಮೆ ಬಾರೋ
ಎಲ್ಲೆ ನೀನಿದ್ದರೂ
ಸುರಿ ಮಳೆ ಸುರಿಯುವ ಸೂಚನೆ
ಶುರುವಾಗಿದೆ ಶುರುವಾಗಿದೆ
ಜತೆಯಲಿ ನೆನೆಯಲು ನಲ್ಲನೆ ಮನಸಾಗಿದೆ, ಮನಸೋತಿದೆ.....
Friday, July 21, 2017
ಎರಡು ಕಣ್ಣುಗಳು
Monday, July 17, 2017
ಧಾರವಾಹಿ ಸುಗಂಧಿನಿ - ಭಾಗ ೩
ತಟದಲ್ಲಿ ನಿಂತು ಹಣೆಯ ಮೇಲೆ ಕೈ ಇತ್ತು ದೂರದೆಡೆಗೆ ಕಣ್ಣು ಹಾಯಿಸಿದೆ , ಸುಶೇಷಣ ತನ್ನ ದೋಣಿಯನ್ನು ದಡದಲ್ಲಿದ್ದ ಮಾಮರಕ್ಕೆ ಕಟ್ಟಿ ಮಾಯವಾಗಿದ್ದ, ಬಹುಶಃ ನಿನ್ನೆ ಬಹಳ ದಣಿದಿದ್ದನೇನೋ ಎದ್ದಿರಲಿಲ್ಲ, ಉಳಿದ ಮೀನುಗಾರರು ಯಮುನೆಯ ಆ ತುದಿಯಲ್ಲಿ ಚುಕ್ಕಿಗಳಂತೆ ಕಾಣುತ್ತಿದ್ದರು . ಆ ದಡ ತಲುಪಿಸಲು ಯಾವ ಮಾಯಾವಿ ಬಂದಾನು? ಆದರೆ ನನಗೆ ಅಲ್ಲಿಗೆ ತಲುಪಲೇ ಬೇಕಿತ್ತು. ಅದೂ ಬಹಳ ತುರ್ತಾಗಿ ರಾಣಿ ರೋಹಿಣಿಯ ಸಂದೇಶ ಹೊತ್ತು , ತಾಯಿ ದೇವಕಿಯನ್ನು ನೋಡಲು, ಮತ್ತೆ ಮೈಯೆಲ್ಲಾ ಪುಳಕಿಸಿತು,ಕೈಯಲ್ಲಿದ್ದ ಗಂಧ ಚಂದನದ ಪೆಟ್ಟಿಗೆ, ಜತೆಗೆ ರಾಣೀವಾಸದವರು ನೀಡಿದ್ದ ಪುಟ್ಟ ಬುಟ್ಟಿ , ಕೈಗಳು ನೋಯಲಾರಂಭಿಸಿತ್ತು
ಇದ್ದಕ್ಕಿದ್ದಂತೆ ಆ ಕಡೆಯಿಂದ ಒಂದು ದೋಣಿ ಇತ್ತ ಬರುತ್ತಿರುವಂತೆ ಕಾಣಿಸಿತು, ಓ ಅದು ಸೈನಿಕರ ದೋಣಿ ಅವರಿಗೆ ಇಲ್ಲೇನು ರಾಜಕಾರ್ಯ, ನನಗರ್ಥವಾಗಲಿಲ್ಲ, ಉಗ್ರಸೇನ ಮಥುರೆಯ ಪಟ್ಟದಲ್ಲಿದ್ದಾಗ ನಂದನನ್ನು ಮತ್ತು ನಂದನ ತಂದೆಯನ್ನು ಪ್ರಾಣಕ್ಕೆ ಸ್ನೇಹಿತರಂತೆ ನೋಡಿದ್ದ, ಆದರೆ ಅವನ ಇದ್ದೊಬ್ಬ ಮಗ ರಾಜ್ಯದ ಮಾನವನ್ನು ಸೂರೆಗೈಯತೊಡಗಿದ, ಸಾಲದು ಅಂತ ತಂದೆಯನ್ನು ಪಟ್ಟದಿಂದ ಕೆಳಗಿಳಿಸಿ ಸ್ವಯಂ ಪಟ್ಟಾಭಿಷೇಕ ಮಾಡಿಕೊಂಡ, ತಂದೆಯ ಸಲಹೆಗಳಿಗೆ ಕಿವಿಗೊಡದೆ, ರಾಜ್ಯದ ಸಾಮಂತರಿಗೆ ಕೊಡಲಾಗುತ್ತಿದ್ದ ಗೌರವ ಮತ್ತು ಮರ್ಯಾದೆ ಕಿತ್ತೆಸೆದು ತೆರಿಗೆ ಮತ್ತು ದಂಡಗಳನ್ನು ಹೆಚ್ಚಿಸಿದ. ಅವನ ಮಾತು ಕೆಳದವರನ್ನು ಮೂಲೆಗೊತ್ತಿದ, ಅಂತೆಲ್ಲಾ ಹಲವಾರು ಕಥೆಗಳು ಆ ದಡದಿಂದ ತೇಲಿ ಬರುತ್ತಿದ್ದವು , ನಾನು ರಾಜಕಾರಣ ಅರಿತವಳಲ್ಲ, ಆದರೂ ನಮ್ಮ ವ್ರಜ ಭೂಮಿಗೆ ಯಾವತ್ತೂ ಕೆಟ್ಟದ್ದು ತಡೆದುಕೊಳ್ಳುವ ಶಕ್ತಿ ಇರಲಿಲ್ಲ, ಅದು ನಂದ ರಾಜನಂತೂ ರಿಷಿ ಸಮಾನ ರಾಜ, ಆಚಾರ ವಿಚಾರದಲ್ಲಾಗಲಿ ಅವನು ಯಾರನ್ನು ನೋಯಿಸಿದ್ದೆ ಇಲ್ಲ, ಮಕ್ಕಳಿಂದ ವೃದ್ಧರವರೆಗೆ ಅದೇ ಆದರೆ ಅದೇ ಪ್ರೀತಿ, ಅಷ್ಟು ಸಮ ತೂಗುವ ಅವನ ಪ್ರಾಮಾಣಿಕತೆಯನ್ನು ಇತ್ತೀಚಿಗೆ ಕಂಸ ಪ್ರಶ್ನಿಸಲಾರಂಭಿಸಿದ್ದ , ಕಂಸ ನಂದನನ್ನು ಬಲ್ಲದಿದ್ದವನೇನಲ್ಲ , ವಸುದೇವ ನಂದ ಕಂಸ ಮೂವರ ಗೆಳೆತನ ಹಳೆಯದ್ದೇ, ಯಾವತ್ತೋ ಒಮ್ಮೆ ವಾಸುದೇವ ಕುಂತಿಯನ್ನು ಕಂಸನಿಗೆ ಕೊಟ್ಟು ವಿವಾಹ ನೆರವೇರಿಸಬೇಕೆಂದುಕೊಂಡಿದ್ದನಂತೆ, ಅವನೋ ಕುಂತಲ ರಾಜ್ಯದ ರಾಜಕುಮಾರನಾದರೂ ಕಂಸನ ಮೇಲೆ ಅತಿಯಾದ ವಿಶ್ವಾಸ, ಅದೆಲ್ಲವೂ ಈಗ ಮರೆತ ಕಥೆ.
ದೂರದಲ್ಲಿದ್ದ ದೋಣಿ ಹತ್ತಿರಕ್ಕೆ ಬಂದಿತ್ತು , ಅದು ಎರಡೆರಡು ಸೈನಿಕರನ್ನು ಹೊತ್ತು ತಂದಿತ್ತು ಒಬ್ಬ ಕಾಂಗದ , ಮತ್ತೊಬ್ಬ ನಿರೂಪ ಇಬ್ಬರು ಇದು ಎರಡನೇ ಸಲ ಬರುತ್ತಿರುವುದು, ಪಾಪ ಅವರೇನು ಮಾಡಿಯಾರು, ಜೀವಂತ ಇರಬೇಕಾದರೆ ರಾಜ ಹೇಳಿದ ಕೆಲಸ ಮಾಡಲೇಬೇಕು, ನನ್ನೆದೆಯಲ್ಲಿ ಯಾಕೋ ಅವರಿಗಾಗಿ ತುಸು ಆರ್ದ್ರ ಭಾವವೊಂದು ಅವತ್ತೇ ಹುಟ್ಟಿತ್ತು, ಹಾಗೆಯೇ ನಂದರಾಜರ ಬಗ್ಯೆ ಕಾಳಜಿಯೂ, ದಡಕ್ಕೆ ದೋಣಿ ಕಟ್ಟಿ ಇಬ್ಬರೂ ಕಟ್ಟಿ ಹಿಡಿದು ಇಳಿದರು , ನನ್ನ ನೋಡುತ್ತಲೇ ಪರಿಚಿತ ಭಾವವೊಂದು ನಗೆಯಲ್ಲಿ ಕೊನೆಯಾಯಿತು, "ತ್ರಿವಕ್ರೆ, ನಂದರಾಜರು ಲಭ್ಯವಿರುವರೇನು? ನಾವು ಬಂದ ವಿಷಯ ಅವರಿಗೆ ತಿಳಿಸಬೇಕಿತ್ತು" ಸಣ್ಣದಾದ ನಡುಕವೊಂದು ನನ್ನೇ ಆವರಿಸಿತು, ತಕ್ಷಣ ಎಚ್ಚೆತ್ತು ನುಡಿದೆ"ನನಗೆ ತಿಳಿಯದು, ನೀವು ಅರಮನೆಯ ಹತ್ತಿರ ಹೋಗಿ ಕೇಳಬೇಕು" "ನೀನು ದೋಣಿಗಾಗಿ ಕಾಯುತ್ತಿರುವೆಯಾ ಸಹೋದರಿ, ನಮ್ಮ ವಿಶಂಕು ನಿನ್ನ ಆ ದಡಕ್ಕೆ ತಲುಪಿಸಿ ಬರುವ, ಸರಿಯೆನು?" ನಿರೂಪನ ದನಿ, ಅದರಲ್ಲಿದ್ದ ನಿಜ ಕಾಳಜಿಗೆ ಕರಗಿದೆ ನಾನು, ನನ್ನ ಯೋಗ್ಯತೆಯನ್ನು ಅರ್ಹತೆಯನ್ನು ಕೇವಲ ನನ್ನ ರೂಪದಿಂದಲೇ ಅಳೆವವರ ಮಧ್ಯೆ ನನಗೆ ಗೌರವಿಸಿ ಅರ್ಥೈಸಿಕೊಳ್ಳುವವರು ಬಹಳೇ ಕಮ್ಮಿ. ಮರು ಮಾತಾಡದೆ ದೋಣಿ ಹತ್ತಿ ಕುಳಿತೆ. ದೋಣಿ ಸಾಗಿತು ಯಮುನೆಯ ನೊರೆ ನೊರೆ ತೆರೆ ಸೀಳುತ್ತ.
(ಮುಂದುವರೆಯುವುದು)
Thursday, July 13, 2017
ಅವನಿಗೆ
ಅವನಿಗೆ ,
ಕೇಳು
ತಣ್ಣನೆಯ ನೀರು ತಲೆಯ ಮೇಲೆ ಬೀಳುತ್ತಿತ್ತು, ಯಾವುದೋ ಜನುಮದ ಪಾಪ ತೊಳೆಯುವಂತೆ ಕಣ್ಣಿಂದ ಜಾರಿದ ಹನಿಯೊಂದು ನೀರ ಜತೆ ಸೇರಿ ಹರಿದು ಹೋಯಿತು ಅದೆಷ್ಟು ಕಣ್ಣ ಹನಿಗಳು ಸೇರಿ ಸಾಗರ ಉಪ್ಪಾಯಿತು? ನಾನು ಕಣ್ಣೊರಸಿ ಬಿಕ್ಕು ತಡೆ ಹಿಡಿದೆ. ಕಾರಣವೇ ಇಲ್ಲದೆ ಬರುವ ಕಣ್ಣೀರು ಒಂದೋ ಸುಖದ್ದು ಕೃತಜ್ಞತೆಯದ್ದು ಮತ್ತೊಂದು ಬಹುಶಃ , ಗತ ಕಾಲದ ನೆನಪುಗಳದ್ದು ಕಹಿಯಾದ್ದು. ನನ್ನ ಕಣ್ಣಿನ ಹನಿ ಅವೆರಡಕ್ಕೂ ಸೇರಿದ್ದಾಗಿರಲಿಲ್ಲ, ನೀರು ಹಿಡಿದಿಟ್ಟ ಮೋಡ ನಾನು , ಸಣ್ಣದ್ದನ್ನು ಸಹಿಸದ ಸೂಕ್ಷ್ಮ ಮನಸ್ಥಿತಿ ಹಾಗಿದ್ದರೆ ಒಳ್ಳೆಯದಿತ್ತೇನೋ , ಆದರೆ ಎಲ್ಲ ಬದಲಾಯಿತು
ಪೂಜೆ ಮುಗಿಸಿ ಕೂತಾಗ ಏನೋ ಮರೆತಂತನಿಸಿ ಕ್ಯಾಲೆಂಡರ್ ನೋಡಿದೆ, ಜುಲೈ ಹದಿಮೂರು ಅಂತ ತೋರಿಸುತ್ತಿತ್ತು ತಟ್ಟನೆ ನೆನಪಾಯಿತು ಇವತ್ತು ಅವನ ಜನ್ಮದಿನ , ಒಂದು ಸಣ್ಣ ಸೆಳಕು ಎದೆಯಲ್ಲಿ, ವಾಟ್ಸಾಪಿನಲ್ಲಿ ನೋಡಿದೆ ನನ್ನ ಶುಭೋದಯಕ್ಕೆ ನಿತ್ಯ ಬರುತ್ತಿದ್ದ ಉತ್ತರವಿಲ್ಲ, ಅವನ ಸಣ್ಣ ಮುನಿಸಿಗೆ ಕಾರಣ ನನಗೆ ಗೊತ್ತಿಲ್ಲದ್ದೇನು ಅಲ್ಲ, ಆದರೆ ನಾನು ಸಂಸಾರದ ನೂರು ಬಳ್ಳಿಗಳಲ್ಲಿ ಬಂಧಿತಳು , ಸೆರಗಲ್ಲಿ ಕೆಂಡದಂತ ಬದುಕನ್ನು ಕಟ್ಟಿಕೊಂಡು ನಿತ್ಯ ಒದ್ದಾಡುತ್ತಿರುವವಳು ಯಾವತ್ತೋ ಅದನ್ನು ಕಿತ್ತು ಓಡಿಹೋಗುತ್ತೇನೆ ಎನ್ನುವ ಹುಚ್ಚು ಭರವಸೆಯಲ್ಲಿ ಪ್ರಜ್ಞಾಪೂರ್ವಕವಾಗಿ ಮೋಹವನ್ನು ಮಮತೆಯನ್ನು ಬಟ್ಟೆಯಾಗಿ ಸುತ್ತಿಕೊಂಡವಳು , ಮನಸ್ಸೇನೋ ಸದಾ ಸಂಚಾರಿ ಆದರೆ ನಿತ್ಯ ಕೆಲಸಕ್ಕೆ ಅದನ್ನ ಕಟ್ಟಿ ಹಾಕಲೇ ಬೇಕಲ್ಲ, ಬೇಕೆಂದಾಗ ಬೇಕೆನಿಸಿದವರನ್ನ ನೋಡುವ ಅವಕಾಶ ಅದೆಷ್ಟು ಜನಕ್ಕೆ ಸಿಕ್ಕೀತು ನಾನಂತು ಹುಟ್ಟಾ ಪಾಪಿ ಕಾಲಿಟ್ಟ ಕಡೆ ಮುಳ್ಳು ಮನಸ್ಸಿನ ಹೃದಯಗಳು ಹೂಗಳ ಮುಖವಾಡ ಹಾಕಿ ಚುಚ್ಚುವಾಗಲು ಸಹಿಸಿ ನಾಳೆ ಎನ್ನುವ ಆಶಾವಾದಕ್ಕೆ ಜೋತು ಬಿದ್ದವಳು ಆದರೆ ಗಂಡು ಎನ್ನುವ ಪ್ರಭೇದದ ಬದುಕು ಈ ಭೂಮಿಯಲ್ಲಿ ಬಹಳ ಸುಲಭವಿದೆ, ಇಷ್ಟೆಲ್ಲಾ ಕಷ್ಟ ಪಡಬೇಕಿಲ್ಲ ಅಲ್ಲವೇ, ಬಹುತೇಕ ಎಲ್ಲ ಸಾರವಜನಿಕ ಮತ್ತು ಖಾಸಗಿ ಜಾಗಗಳಲ್ಲಿ ಜಗತ್ತು ಹೇಗಿದ್ದರೂ ಗಂಡು ಎನ್ನುವ ಪಟ್ಟ ಕಟ್ಟಿ ವಿನಾಯತಿ ಕೊಟ್ಟುಬಿಡುತ್ತದೆ
ನಾನು ಯೋಚನೆಗಳಲ್ಲಿ ಕಳೆದು ಹೋಗಿದ್ದೆ, ನನ್ನ ಮನಸ್ಸು ಮಾತ್ರ ನೋಡ ಬಯಸುತ್ತಿತ್ತು, ಅವನನ್ನ,ಆದರೆ ನಾನು ನೋಡ ಬಯಸಿದ್ದ ಅವನು ಅವನಾಗೆ ಉಳಿದಿರಲಿಲ್ಲ, ಸುಮ್ಮನೆ ಮುನಿಸು, ನಮ್ಮ ಬದಲಾದ ಬದುಕುಗಳ ಜತೆ ಜತೆಗೆ ಬದಲಾದ ಪ್ರಾಮುಖ್ಯತೆಗಳನ್ನ ಅರ್ಥೈಸದೆ ಹಳೆಯ ನೆನಪುಗಳಿಗೆ ಅದು ಕೊಡುವ ನೋವುಗಳಿಗೆ ನಾನೇ ಕಾರಣ ಅನ್ನುವ ಮಾತು ನನ್ನ ಚುಚ್ಚಿ ನೋಯಿಸುವುದು, ನನಗೆ ನಿಜವೆಂದರೆ ಈ ಜಗತ್ತಿನಲ್ಲಿ ಯಾರು ಬೇಕಿಲ್ಲ, ನೀನೊಬ್ಬ ಸಾಕು ಎನ್ನುವ ನನ್ನ ಮನಸ್ಥಿತಿಯನ್ನ ಮುಚ್ಚಿಡಲು ಪ್ರತಿಬಾರಿಯೂ ಪ್ರಯತ್ನಿಸಿ ಸೋತಿದ್ದೇನೆ,ಮತ್ತೆ ಮತ್ತೆ ಬದಲಾಗುವ ಪರಿಸ್ಥಿತಿಗಳ ನಡುವೆಯೂ ನೀನೊಬ್ಬ ಮಾತ್ರ ಬದಲಾಗದ ಅದೇ ಸ್ಥಾನದಲ್ಲಿ ಹೃದಯದಲ್ಲಿ ಕೂತಿದ್ದೀಯಾ ಎನ್ನಲು ಪ್ರಯತ್ನಿಸಿ ಸೋತಿದ್ದೇನೆ ಕೊನೆಗೆ ಇದೆಲ್ಲವೂ ಹನಂಬಿಕೆ ಇಲ್ಲದ ಅವನಲ್ಲಿ ಹೇಳುವದಕ್ಕಿಂತ ಮೌನಿಯಾಗಿರುವುದೇ ಲೇಸು ಅನ್ನಿಸಿ ಮೌನವು ಆಗಿಬಿಟ್ಟಿದ್ದೇನೆ,
ನದಿ ತನ್ನ ಪಾತ್ರಗಳನ್ನು ಸದಾ ಬದಲಿಸಬೇಕಾಗುತ್ತದೆ,ಭೂಮಿಯ ಏರಿಳತಗಳಿಗೆ ತಕ್ಕಂತೆ ಆದರೆ ಕೊನೆಯ ತನಕವೂ ದಡಗಳೆರಡೂ ನದಿಯೊಡನೆ ಮೌನವಾಗಿ ಪಯಣಿಸುತ್ತದೆ, ನೋವಿನಲ್ಲಿ ನಲಿವಿನಲ್ಲಿ ಅದೇ ತಬ್ಬುಗೆಯಲ್ಲಿ ಸಂತೈಸುತ್ತಾ ಸಾಗರನ ಒಡಲು ಸೇರುವವರೆಗೂ , ಆ ಮಹಾಯಾತ್ರೆಯಲ್ಲಿ ನದಿಗೆ ಈ ಸಾಂಗತ್ಯ ಕೊಡುವ ಆತ್ಮಬಲ ಬಣ್ಣಿಸಲಾಗದ್ದು, ನನ್ನ ಚಂದ್ರಮ ಹಾಗೆಯೆ , ಅವನು ಜತೆಗಿರಲಿ ಇಲ್ಲದಿರಲಿ, ಮುನಿಸಿರಲಿ ಸೊಗವಿರಲಿ ಅವನಿರದೆ ಈ ಬದುಕೆಂಬ ನದಿಗೆ ಯಾವದಡಗಳಿಲ್ಲ ನಾನೆಲ್ಲಿ ಹೋದರು ಅವನ ನೆನಪಿನ ಬಾಹುಗಳು ಕಾಳಜಿಯ ಕಣ್ಣುಗಳು ಸದಾ ನನ್ನ ಜತೆಗಿರುತ್ತವೆ, ಜೀವವೊಂದು ಮತ್ತೊಂದು ಜೀವಕ್ಕೆ ದೇಹದ ಅರಿವಿಲ್ಲದೆ ಅಂಟಿಕೊಂಡ ಹಾಗೇ
ಅ ವನೇ, ನಾನು ಉರಿಯುತ್ತಿರುತ್ತೇನೆ , ನಿನ್ನ ಅದೃಶ್ಯ ಸಹಾಯದೊಂದಿಗೆ, ನಿನ್ನ ಮುನಿಸು ಕರಗಲಿ, ಮತ್ತದೇ ಬೆಚ್ಚನೆಯ ಪುಳಕ ಇಬ್ಬರ ಹಾದಿಯಲ್ಲಿ ಚೆಲ್ಲಿಕೊಳ್ಳಲಿ, ನಿನ್ನ ಅರೋಗ್ಯ ನಗು ನನಗಾಗಿಯಾದರೂ ಸದಾ ನಳನಳಿಸುತ್ತಿರಲಿ
ನಿತ್ಯವೂ ಹುಟ್ಟಿದ ಹಬ್ಬವಾಲಿ
ಇಂತಿ ನಿನ್ನವಳಾಗದ ನಿನ್ನವಳು ಇವಳು
Thursday, December 15, 2016
ಬದುಕೆಂಬ ಬೀಸುಗಲ್ಲು
"ಕೈ ನೋವು ಬಂತೆನಾ ನಿಂಗೆ, ನಾಕೊಳ್ಳು ಹೂರಣ ಬೀಸದು ಸುಲಭದ್ ಕೆಲ್ಸಲ್ಲ, ಏಳು , ಈ ಒಳ್ಳು ಆನೆ ಬೀಸ್ಕೊಡ್ತಿ" ಅಪ್ಪನ ಕಣ್ಣುಗಳನ್ನೆ ನಿಟ್ಟಿಸಿದಳು ನಕ್ಷತ್ರ, ಅಲ್ಲಿ ಕಕ್ಕುಲಾತಿ ಬಿಟ್ಟರೆ ಬೇರೇನಿರಲಿಲ್ಲ, "ಇಲ್ಲೆ ಅಪ್ಪ, ಸುಸ್ತೇನು ಆಗಲ್ಲೆ, ಇನ್ನೊಂದು ಒಳ್ಳಾಗ್ತು ಅಷ್ಟೆಯಾ, ನೀನು ಬ್ಯಾಗ ಪೂಜಿಗೆ ರೆಡಿ ಮಾಡ್ಕ್ಯ" ಎಂದವಳೆ ಬೇಳೆ ಮಿಶ್ರಣವನ್ನ ಹದಾ ಸೌಟಲ್ಲಿ ಒರಳಿಗೆ ದಬ್ಬತೊಡಗಿದಳು, ದೀಪಾವಳಿಯಲ್ಲವೆ ಕೆಲಸದ ಹೊರೆ ಕಾಯುತ್ತಿತ್ತು, ಸೂರ್ಯ ಮತ್ತು ಜಿತುವಿನ ಮಾತು ಜಗಲಿಯಿಂದ ಒಳ್ಳುಕಲ್ಲು ಇಟ್ಟಿದ್ದ ಹಿತ್ತಿಲವರೆಗು ಕೇಳುತ್ತಿತ್ತು, ಹೌದಲ್ಲ, ತೋರಣ ಕಟ್ಟಬೇಕು, ತುರುರೊಟ್ಟಿ ಚೆಂಡು ಶೇವಂತಿಗೆ ಹಾರ ಕೊಟ್ಟಿಗೆ ಯಲ್ಲಿ ನ ಅಷ್ಟೂ ಜೀವಗಳಿಗೆ, ಮೊನ್ನೆ ಬಂದವನೆ ಜಿತು ಅವಕ್ಕೆ ಎಣ್ಣೆ ನೀರು ಹಾಕಿ ಹೇನು ನೊಣ ತೆಗೆದು ನೀಟಾಗಿ ಸ್ನಾನ ಮಾಡಿಸಿದ್ದ, ಬೆಳ್ಳಿ ದನಕ್ಕೆ ಅವನ ದನಿ ಕೇಳಿದರೆ ಖುಷಿ, ಎರಡು ಸಾರಿ ಹೆಚ್ಚೆ ಅಂಬಾ ಅನ್ನುತ್ತಾಳೆ, ಅಪ್ಪ ಅವುಗಳನ್ನು ಪ್ರಾಣಿಗಳಲ್ಲ ದೇವತೆಯರು ಅನ್ನುತ್ತಿದ್ದ, ಸಮೃದ್ಧ ಹಾಲು ಹೈನು, ಹಸಿರಾದ ತೋಟ ಆದರು ತಾಯಿಲ್ಲದ ತವರು ಸಂಕಟವೆ, ಅಂಟಾಗಿ ಉಂಡೆ ಕಟ್ಟುವ ಹದಕ್ಕೆ ಬಂದು ನುಣ್ಣಗಾದ ಹೂರಣವನ್ನು ತೆಗೆದಳು ನಕ್ಷತ್ರ, ಒಳ್ಳು ಕಲ್ಲಿಗೆ ನೆನೆಯುವಷ್ಟು ನೀರು ಬಸಿದು ಏಳುವ ವೇಳೆಗಾಗಲೇ ಒಳಗಿನಿಂದ " ಈಶಾನ ಸರ್ವ ವಿದ್ಯಾನಾಂ ಈಶ್ವರ ಸರ್ವ ಭೂತಾನಾಂ, ಬ್ರಹ್ಮಾಧಿಪತಿರ್ ಬ್ರಹ್ಮಣೋಧಿಪತಿರ್ ಬ್ರಹ್ಮ, ಶಿವೋಮೆ ಅಸ್ತು ಸದಾ ಶಿವೋಹಮ್" ಅಂತ ಅಪ್ಪನ ಮಂತ್ರ ಧಾರೆಯಲ್ಲಿ ಕಳೆದು ಹೋದಳು ಕೈಗಳು ಯಾಂತ್ರಿಕವಾಗಿ ಕೆಲಸಗಳನ್ನು ಮಾಡುತ್ತಿದ್ದರೆ ಆಕೆ ನೆನಪುಗಳ ಲೋಕದಲ್ಲಿ ಅಮ್ಮನೆದುರು ಕೂತಿದ್ದಳು, ಅದೇ ಅಮ್ಮ, ಆರ್ದ್ರ ಕಣ್ಣಿನ ಗಂಟಲೊಳಗಡೆಯೆ ಹೂತುಹೋಗುತ್ತಿದ್ದ ಮಾತಿನ ಅಮ್ಮ, ಒಟ್ಟು ಕುಟುಂಬದ ಗಾಣದೆತ್ತು, ಕೆಲಸದವರಿಂದಲು ಕೂಡ ಬೋಳೆ ಅಮ್ಮ ಅನಿಸಿಕೊಂಡ ತನ್ನಮ್ಮ, ಎದುರು ಕೂತು ಮಾತಾಡುತಿದ್ದಳು" ಬ್ಯಾಡ ಕೂಸೆ, ನಿಂಗವ ಇಷ್ಟ ಹೇಳಿ ಸೈತ ಯಾರೆದ್ರಿಗು ಹೇಳಡ, ಮದ್ಲೆ ಮನೆಲಿ ನಿಮ್ಮಪ್ಪ ಕೋಲೆಬಸವ, ಆನು ದನಿ ಹೂತ್ ಹೋದೋಳು, ನಿನ್ ಬೆನ್ನಿಗೊಬ್ಬ ತಮ್ಮ ಇದ್ದ ಹೇಳಿ ಮರೆಯಡ, ಆನಂತು ಈ ಸಂಸಾರಕ್ಕೆ ತೇದು ತೇದು ಜೀವ ಹೈರಾಣ ಮಾಡ್ಕ್ಯಂಡಿ, ಆದ್ರು ಮಾತು ಕೇಳದು ತಪ್ಪದಿಲ್ಲೆ, ನೀ ಮತ್ತೆ ನಂಗಳ ತಲೆ ಮ್ಯಾಲೆ ಚಪ್ಪಡಿ ಕಲ್ಲು ಹಾಕಡ, ಆನಂತು ಬದ್ಕದಿಲ್ಲೆ, ಜನ ಮಾತು ಕೇಳೇ ಕೇಳೆ ಸತ್ತೋಗ್ತಿ" ಆಕೆಯ ಕಣ್ಣುಗಳು ಆಹ್, ಅದು ಕಣ್ಣಲ್ಲ ಸಾಗರ, ಪೂರ್ತಿ ನೀರು ತುಂಬಿತ್ತು, ತನಗೆ ವಿಚಿತ್ರ ಅನ್ನಿಸಿತ್ತು, ಯಾರೋ ಜನಕ್ಕಾಗಿ ಅಮ್ಮ ತನ್ನ ಮಗಳಬಲಿ ಕೊಡುತ್ತಾಳೆ ಜೀವ ತೆಗೆದುಕೊಳ್ಳುತ್ತಾಳೆ ಅನ್ನುವುದು ಅತ್ಯಂತ ಸೋಜಿಗ ತರುವ ವಸ್ತುವಾಗಿತ್ತು, ಜತೆಗೆ ಅಮ್ಮನ ಮೇಲೆ ಸಿಟ್ಟು ಬಂದಿತ್ತು, "ಬೇರೆ ಯಾರ್ಜೊತಿಗಾದ್ರು ಎನ್ ಮದ್ವೆ ಆಗದಾದ್ರೆ ನಾನೆ ಹೋಗಿ ಚೌಡಿ ಹೊಳಿಗೆ ಹಾರ್ಕತ್ತಿ, ಈ ಮಗಳು ನಿಂಗಳ್ ಪಾಲಿಗೆ ಸತ್ತೋದ ಅಂದ್ಕಳಿ" ಅಂದವಳೆ ಎದ್ದು ಮೆತ್ತು ಹತ್ತಿ ಧಡಾರ್ ಅಂತ ಬಾಗಿಲಿಳೆದುಕೊಂಡಿದ್ದೆ ತಾನು, ಅಮ್ಮನ ಸ್ವಭಾವವೆ ಅದಾಗಿತ್ತಾ? ಮೊದಲನೆಯ ಸೊಸೆ, ಮೂರು ಜನ ಅಣ್ಣ ತಮ್ಮಂದಿರು ಇರುವ ಮನೆಗೆ ಅಮ್ಮ ಎರಡು ಹಸು, ಒಂದು ಒಳ್ಳ್ಕಲ್ಲು ಒಂದು ಟ್ರಂಕು ಹಿಡಿದು ಗೃಹ ಪ್ರವೇಶ ಮಾಡಿದವಳು, ಅತ್ತೆ ಮಾವ ಇಬ್ಬರು ಇಲ್ಲದ ಸಂಸಾರಕ್ಕೆ ದಿಕ್ಕಾದವಳು, ಅಪ್ಪನೋ ಬೋಳೆಶಂಕರ, ತಮ್ಮಂದಿರು ಮದುವೆಯಾದರು, ಅವರ ಹೆಂಡದಿರಿಗೆ ಪೇಟೆಯ ಹುಚ್ಚು, ಒಬ್ಬಳು ಸದಾ ಸಾಗರದ ತವರುಮನೆಯಲ್ಲಿ ಝಾಂಡ, ಮತ್ತೊಬ್ಬಳು ಕೋಣೆಯಿಂದ ಕೆಳಗಿಳಿಯುತ್ತಿರಲಿಲ್ಲ, ಅವರಿವರ ಮಾತುಗಳು ಅಮ್ಮನ ಕಿವಿಯಲ್ಲಿ ಅದ್ಹೇಗೆ ಬೀಳುತ್ತಿತ್ತೋ, ,,"ಜನ ನೂರ್ ಹೇಳ್ಲಿ, ನಂಗವು ನಿಯತ್ತಲಿದ್ವಲ, ದೇವ್ರು ಕಾಯ್ತ, ಸುಮ್ನಿರು" ಅಂತ ಸಮಾಧಾನಿಸುತ್ತಿದ್ದ ಅಪ್ಪನ ಮಾತುಗಳು ಅವಳೆದೆಗೆ ನಾಟುತ್ತಲೆ ಇರಲಿಲ್ಲ, ಸದಾ ಯೋಚನೆಯಲ್ಲಿಯೆ ಇರುತ್ತಿದ್ದಳು, ತನಗು ಸದಾ ಅದೇ ಉಪದೇಶ" ಜನ್ರ ಬಾಯಿಗೆ ಶಿಕ್ಕಡ ಕೂಸೆ, ಜೀವ ಇದ್ಹಾಂಗೆ ಸಾಯಿಸ್ಬುಡ್ತ, ಒಳ್ಳೆ ಕಡಿಗೆ ನಿನ್ ಮದ್ವೆ ಆದ್ರೆ ಸಾಕು" ವಿಧಿಯ ಆಟ ಬೇರೆಯೆ ಇತ್ತು, ಹತ್ತು ವರ್ಷದಿಂದ ಪರಿಚಿತ ಕೈಸಾಲಿನ ಹುಡುಗ ಸೂರ್ಯನ ಸ್ನೇಹ ಸೆಳೆಯತೊಡಗಿತ್ತು, ಅವನು ಡೆಲ್ಲಿಗೆ ಹೊರಟು ನಿಂತಿದ್ದ, ತಾನು ನಿರ್ಧಾರ ಮಾಡುವಂತದ್ದೇನಿತ್ತು, ಜಾತಿಯವನೆ, ಮನೆಯಲ್ಲಿ ಅನುಕೂಲಸ್ಥ, ಅದೆಲ್ಲಕ್ಕಿಂತ ತಾನು ಒಲಿದದ್ದು ಅಪ್ಪನ ಸ್ವಭಾವಕ್ಕು ಅವನ ಸ್ವಭಾವಕ್ಕು ಇದ್ದ ಸಾಮ್ಯತೆಗೆ, ಅಮ್ಮನಿಗೆ ಅದೂ ಒಂದಿ ಮರ್ಯಾದೆ ತೆಗೆಯುವ ವಿಷಯವಾಗಿತ್ತು, ಯಾಕೆಂದರೆ ಅವ ಸಗೋತ್ರ, ಸಗೋತ್ರದ ಸಂಬಂಧಗಳು ಅಣ್ಣ ತಂಗಿ ಅಂತಾನೆ ಪರಿಗಣಿಸಲ್ಪಡುತ್ತದೆ ಅಂತ ಚಿಕ್ಕಪ್ಪಂದಿರು ಮಾತಾಡುತ್ತಿದ್ದದ್ದು ತಾನೂ ಕೇಳಿಸಿಕೊಂಡಿದ್ದಳು, ಅವರಿಗೂ ಹೆಣ್ಮಕ್ಕಳಿದ್ದರು ಎನ್ನುವುದನ್ನು ಮರೆತಂತೆ ಅವರು ಮಾತಾನಾಡುತ್ತಿದ್ದ ಪರಿ ತನ್ನ ಹಟವನ್ನು ಇನ್ನೂ ಹೆಚ್ಚಿಸಿತ್ತು, ಆ ಸಮಯದಲ್ಲಿ ಅಪ್ಪ ಜತೆ ನಿಂತಿದ್ದ, ಮಠದವರು ಸಗೋತ್ರ ವಿವಾಹ ನಿಶ್ಚಯಿಸಿದ್ದಕ್ಕೆ ಸೀಮೆಯ ಜನರನ್ನೆಲ್ಲ ಕರೆದು ಅವರೆದುರು ಅಪ್ಪನಿಗೆ ಛೀಮಾರಿ ಹಾಕಿದ್ದರು, ಆದರೆ ಅಪ್ಪನ ಮಾತೊಂದೆ" ನನ್ನ ಮಗಳು ಯಾವ ತಪ್ಪು ಮಾಡಿಲ್ಲ, ಅವಳಿಷ್ಟ ಪಟ್ಟರೆ ಹೊಲೇರ ಹುಡುಗಂಗೆ ಕೊಟ್ಟು ಬೇಕಾದರೆ ಮದುವೆ ಮಾಡತ್ತಿನಿ' ಅಪ್ಪನಲ್ಲೊಂದು ಅಂತ ಮನಸ್ಥಿತಿ ಇದ್ದದ್ದು ತನಗೆ ಗೊತ್ತಾದದ್ದೆ ಅವಾಗ, ತಾನು ರೂಪದಲ್ಲೆನೊ ಅಪ್ಪನ ಪಡಿಯಚ್ಚು ಆದರೆ ಕಣ್ಣುಗಳು ಮಾತ್ರ ಅಮ್ಮನವೆ ಅಂತ ಅಪ್ಪಯಾವಾಗ್ಲು ಹೇಳ್ತಿದ್ದರು, ಅಪ್ಪ ಗಟ್ಟಿ ನಿಂತು ಮದುವೆ ಮಾಡಿಸಿದರು, ಆದರೆ ಅಮ್ಮ ಮನಸ್ಪೂರ್ವಕ ಆಶೀರ್ವಾದ ಮಾಡಲೆ ಇಲ್ಲ, ಕೊಂಡಿ ಕಳಚಿದ ಬೇರಾದ ತಾನು ಪೇಟೆಗೆ ಬಂದೆನಾದರು ಮತ್ತೆ ಮನೆಯ ಸಂಪರ್ಕ ದಕ್ಕಲೆ ಇಲ್ಲ, ಆದರೆ ಜಿತು ಎಸ್ ಎಸ್ ಎಲ್ ಸಿ ಮುಗಿಸಿದವ ಬೆಂಗಳೂರಲ್ಲಿ ಪಿಯುಸಿ ಓದತಿದ್ದಾನೆ ಅಂತ ಊರಗೌಡರ ಮಗ ಪ್ರಶಾಂತ ಸಿಕ್ಕಿದಾಗ ಹೇಳಿದ್ದ, ತನ್ನ ಮನಸ್ಥಿತಿಯ ಅರಿವಿದ್ದ ಸೂರ್ಯ ತನ್ನ ಜತೆಗೆ ಬಂದು ಕಾಲೇಜು ಹುಡುಕಿದ್ದ, ತಾನು ಬರುವಾಗ ಐದನೆ ತರಗತಿಯಿದ್ದ ಮುದ್ದು ಕೆನ್ನೆಯ ತಮ್ಮ ತನ್ನೆತ್ರಕ್ಕೆ ಬೆಳೆದಿದ್ದು ನೋಡಿ ಖುಷಿಯಾಗಿತ್ತು ತನಗೆ, ಅವನು ಅಷ್ಟೇ ನಿಧಾನಕ್ಕೆ ಅದೇ ಸಲಿಗೆ ಪ್ರೀತಿಗೆ ಮರಳಿದ್ದ, ಮನೆಯ ಸುದ್ದಿಯೆಲ್ಲ ತಿಳಿದಿತ್ತು, ಚಿಕ್ಕಪ್ಪನ ಮೊದಲನೆ ಮಗಳು ಸ್ವಾತಿ ವಿದೇಶಕ್ಕೆ ಗೌಡರ ಹುಡುಗನೊಂದಿಗೆ ರಿಜಿಸ್ಟರ್ ಮದುವೆ ಮಾಡಿಕೊಂಡು ಹಾರಿದ್ದನ್ನು, ಮತ್ತೊಬ್ಬ ಚಿಕ್ಕಪ್ಪನ ಒಂದೇ ಮಗಳು ಗ್ಯಾರೇಜಿನ ಅನ್ವರನೊಂದಿಗೆ ಓಡಿಹೋಗಿ ಕಾಣೆಯಾದ ಸುದ್ದಿಗಳು ತನ್ನ ತಲುಪುತ್ತಲೆ ಇದ್ದವು, ಅಮ್ಮ ಸದಾ ತನ್ನ ಸುದ್ದಿ ಮಾತಾಡುವ ಸಂದರ್ಭದಲ್ಲಿ ಕಣ್ಣು ತುಂಬಿಕೊಳ್ಳುವುದನ್ನು ಕೇಳಿದಾಗಲೆಲ್ಲ ತನಗೆಷ್ಟು ಬಾರಿ ಓಡಿ ಹೋಗಿ ತೆಕ್ಕೆ ಬೀಳಬೇಕೆಂದನಿಸಿರಲಿಲ್ಲ, ಆದರೆ ಅದೇ ಸಮಯಕ್ಕೆ ಸೂರ್ಯನ ಕೆಲಸ ಅಮೆರಿಕಾದಲ್ಲಿ ಒಂದು ವರ್ಷದ ಕಾಂಟ್ರಾಕ್ಟ್ ಮೇಲಾಗಿತ್ತು,ಅವನನ್ನ ಕಳಿಸಿ , ಮನೆಗೆ ಮೊದಲ ಬಾರಿ ಹೊರಟು ನಿಂತಾಗ, ಅಮ್ಮನ ನೋಡುವ ಕಾತರವಿತ್ತು, ಅದೇ ಕಾತರದಲ್ಲೆ ಬಂದವಳಿಗೆ ಸಿಕ್ಕಿದ್ದು ನಿಸ್ತೇಜ ಅಮ್ಮ, ಸಣ್ಣ ದನಿಯಲ್ಲಿ ವಿಚಾರಿಸಿದ್ದಳು " ಅಂತು ಬಂದ್ಯಲ್ಲ, ಎಷ್ಟ್ವರ್ಷಾತೆ ನಿನ್ ಮದ್ವೆ ಆಗಿ? ಸ್ವಾತಿ ಬಸುರಿಯಡ, ನಿಂಗೆ ಇನ್ನು ಸುದ್ದಿ ಇಲ್ಲೆ, ಚೆಕ್ ಮಾಡ್ಸಕ್ಕಾಯಿತ್ತು, ಅವ ಚೆನಾಗಿದ್ನ ನಿನ್ನತ್ರ, ಮನೆ ತಗಳ್ಳಲ ಇನ್ನೂ? ಸ್ವಾತಿಯವು ಬೆಂಗಳೂರಲಿ ಮನೆ ತಗಂಡ್ವಡ, ಎಂಗೊತ್ತಿಲ್ಯಪ, ನಿಮ್ ಚಿಕ್ಕಿ ಹೋಗಿತ್ತು ಹಂಗಾಗಿ ಹೇಳ್ದಿ, ಅಷ್ಟೇ " ಅಂತೆಲ್ಲ ತನಿಖೆ ಶುರು ಮಾಡಿದಾಗ ಎಷ್ಟು ಮನಸ್ಸಿಗೆ ನಿರಾಸೆಯಾಗಿತ್ತು, ಮನೆಗೆ ತಂದ ಫ್ರಿಜ್ಜು ವಾಶಿಂಗ್ ಮಷೀನು, ಮಿಕ್ಸಿ ಎಲ್ಲ ತೋರಿಸಿ ಅದೆಲ್ಲ ಸ್ವಾತಿಯೆ ಕೊಟ್ಟದ್ದು ಅಂದಾಗ ಇನ್ನು ಒಂಥರಾ ಅನಿಸಿತ್ತು ತನಗೆ, ಹೌದು ಸೂರ್ಯ ತಾನು ದೇಶ ಸುತ್ತಿದ್ದೆವು, ಇಬ್ಬರು ಮಗುವಿನ ಬಗ್ಗೆ ಯೋಚಿಸಿರಲಿಲ್ಲ, ಅದಕ್ಕೆ ಸರಿಯಾಗಿ ದೋಷಗಳೆ ಇಲ್ಲದಿದ್ದರು ಮಕ್ಕಳಾಗಿರಲಿಲ್ಲ, ಮನೆಯ ಬಗ್ಗೆ ಇಬ್ಬರಿಗೂ ಅಂತಹ ವ್ಯಾಮೋಹ ಇರಲಿಲ್ಲ" ಆಗ ಕಾಲಕ್ಕೆ ಆಗ್ತು ಬಿಡು ಪುಟ್ಟಿ, ಅಮ್ಮನ್ ಮಾತು ಮನಸಿಗೆ ತಗಳಡ" ಅಂದ ಅಪ್ಪನನ್ನ ಅಪ್ಪಿ ಅತ್ತಿದ್ದೆ ತಾನು, ಅಮ್ಮನಿಗೆ ಅಷ್ಟು ಸೂಕ್ಷ್ಮ ಇಲ್ಲದೆ ಹೋಯಿತೆ? ಯಾಕೆ ಹೀಗೆ ಈ ಅಮ್ಮ? ತನಗೆ ಅರ್ಥವೆ ಆಗಿರಲಿಲ್ಲ, ಮತ್ತೆ ಹೋಗುವದಕ್ಕು ಮನಸಾಗಲಿಲ್ಲ ತನಗೆ ಅದಾಗಿ ಒಂದೇ ವರ್ಷಕ್ಕೆ ಅಮ್ಮ ಮೂಳೆ ಸವೆತಕ್ಕೊಳಗಾಗಿ ಹಾಸಿಗೆ ಹಿಡಿದ ಸುದ್ದಿ ಕೇಳಿ ಓಡಿ ಬಂದಿದ್ದೆ ತಾನು ಸೂರ್ಯ ನೊಂದಿಗೆ, ಉಳಿಸಿಕೊಳ್ಳಲಾಗಲೆ ಇಲ್ಲ, ಅವಳ ಕೊನೆಯ ಮಾತುಗಳು ಇನ್ನೂ ಕಿವಿಯಲ್ಲಿ ಸುತ್ತುತ್ತಿವೆ"ಮಕ್ಕಳು ಬೇಕೆ ಬೇಕು ಕೂಸೆ, ನಿಂಗಕ್ಕಾಗ್ಲೆ ಅಂದ್ರೆ ದತ್ತು ತಗಳಿ, ಜಿತುಗೆ ಒಳ್ಳೆ ಅವ ಇಷ್ಟ ಪಡ ಹುಡ್ಗಿನೆ ಮದ್ವೆ ಮಾಡಿ, ಎಂತಕ್ಕು ಯೋಚನೆ ಮಾಡಡ, ಎರಡೆಳೆ ಸರ ನಿಂಗೆ ಮತ್ತೆ ಬರ ಸೊಸೆಕೂಸಿಗೆ ಮಾಡ್ಸಿದ್ದಿ, ಇನ್ನು ಆನು ಉಳಿತ್ನಲ್ಲೆ, ಎಂಗೆ ಗೊತ್ತಾಯ್ದು, ಹಾ, ನಿಂಗೊಂದು ವಿಷಯ ಹೇಳಕ್ಕು, ನೀನು ಹುಟ್ಟಿದ್ದು ಒಳ್ಳುಕಲ್ಲು ಪೂಜೆ ದಿನ, "ಗಳೆಗೆಮಟ್ಟಿ" ಗೆ ಪ್ರತಿ ವರ್ಷ ದೀಪಾವಳಿ ಪೂಜೆ ತಪ್ಸಡ, ಒಳ್ಳೆದಾಗ್ತು" ಅದಾಗಿ ನಾಲ್ಕೆ ದಿನಕ್ಕೆ ತವರು ಖಾಲಿಯಾಗಿತ್ತು, ದುಃಖ ಹೊತ್ತ ಹಿತ್ತಿಲ ತುಂಬೆಲ್ಲ ಅಮ್ಮನೆ ಇದ್ದಾಳೆ ಎನಿಸಿಬಿಟ್ಟಿತ್ತು, ಈ ಮಾತಿಗೀಗ ಎರಡನೆ ವರ್ಷ, ಭೂಮಿ ಹುಣ್ಣಿಮೆ ದಿನ ಅಮ್ಮ ದೂರವಾಗಿದ್ದು, ದೀಪಾವಳಿ ಅಲ್ಲಿಂದ ಬರೀ ಎರಡು ವಾರಕ್ಕಿಂತ ಕಮ್ಮಿ ದಿನಗಳು, ಇವತ್ತು ತಾನಿಲ್ಲಿ ಅವಳ ಜಾಗದಲಿ ಕೂತು ಅವಳಂತಾಗದ ಮನಸ್ಥಿತಿಯಲ್ಲಿ ಪೂಜೆಗೆ ಅಣಿ ಮಾಡುತ್ತಿದ್ದೇನೆ ಎಂತ ಕಾಲ, ಯಾವುದನ್ನು ಬದಲಾಯಿಸಿಬಿಡುತ್ತದೆ, " ಅಂದುಕೊಂಡಳು ನಕ್ಷತ್ರ, ಹಬ್ಬದ ಸಡಗರ ಗಳಿಗೆ ಮಟ್ಟಿಯ ಪೂಜೆ ಮಾಡಿ ಬಲಿರಾಯನನ್ನು ರಾತ್ರಿ ದೀಪಗಳ ಮೆರವಣಿಗೆಯಲ್ಲಿ ಕಳಿಸಿಕೊಟ್ಟು ಮುಗಿಯಿತು, ಮರುದಿನ ಹಾಯಾಗಿ ಕಾಲುಚಾಚಿ ಎಲ್ಲ ಜಗಲಿಕಟ್ಟೆಯ ಮೇಲೆ ಕೂತಾಗ
ನಕ್ಷತ್ರ ನುಡಿದಳು"ಅಪ್ಪ, ಎರಡು ವಿಷಯ ಮಾತಾಡಕ್ಕು,ಈಗ ಮಾತಾಡಲಡ್ಯಿಲ್ಲ್ಯ?" ಅಪ್ಪ ಮುಗುಳ್ನಕ್ಕು ನುಡಿದರು"ಮದಲ್ನೆ ವಿಷ್ಯ ಎಂಗೊತ್ತಾಯ್ದು, ಎರಡನೆದು ಹೇಳು" ನಾಚಿಗೆಯ ತೆರೆಯಲ್ಲಿ "ಹು ನಂಗೆ ನಾಕು ತಿಂಗಳು ಈಗ , ಅಪ್ಪ, ಜಿತು ಮದ್ವೆಯಾಗಿದ್ರೆ ಈ ಮನೆಗೊಂದು ದಿಕ್ಕಾಗ್ತಿತ್ತು, ನಂಗವು ಇಲ್ಲೆ ಅರಿಶಿನಗೇರಿಲಿ ತೋಟ ಮನೆ ತಗತ್ಯ, ನಿಂಗೆ ಹತ್ರ ಇದ್ದಾಂಗಾತು ಹೇಳಿ ಸೂರ್ಯ ಅವರಪ್ಪ ಅಮ್ಮ ಎಲ್ಲ ತೀರ್ಮಾನ ತಗೈಂದ, ಇನ್ನು ಒಂದ್ವಿಷ್ಯ ಇದ್ದು, ಎನ್ನ ಮನೆಯವರ ಆಫೀಸು ಗೆಳೆಯನ ಮಗಳು ಒಂದಿದ್ದು, ಅದಕ್ಕೆ ಹಳ್ಳಿ ಜೀವನವೆ ಬೇಕಡ, ಜಿತುಗೆ ಮುವತ್ತೆರಡು ಅದಕ್ಕೆ ಇಪ್ಪತ್ತೇಳಾತು, ಜಾತಿ ಸಲ್ಪ ಬೇರೆದೆ ಆಗ್ತು ಆದ್ರೆ ಹುಡ್ಗಿ ಒಳ್ಳೆದೆ, ಹೆಂಗು ನಮ್ಮನೆ ಅಪ್ಪಿ ಇಲ್ಲೆ ಕೆಲಸ , ಒಳ್ಳೆ ಜೋಡಿ, ಒಬ್ಬರನ್ನೊಬ್ಬರು ಇಷ್ಟ ಪಟ್ಟಿದ್ದ, ನೀ ಹೂ ಅಂದ್ರೆ ಕರ್ಕಬತ್ತಿ ಮುಂದಿನ್ವಾರ" ಅಪ್ಪನ ಕಣ್ಣು ಪಸೆಗಟ್ಟಿತು ಅನಿಸಿತಾ? "ಆಗ್ಲಿ, ಹೆಣ್ಣು ಗಂಡು ಒಪ್ಪಿದ್ದ ಅಂದ್ಮೇಲೆ ನಂದೇನಿದ್ದು, ಕೂತ್ಕ ಬಾ ಇಲ್ಲಿ" ಅಂದ ಅಪ್ಪನ ಪಕ್ಕ ಕೂತಳು ನಕ್ಷತ್ರ, ಅಪ್ಪನ ಕೈ ಮಗಳ ತಲೆ ಸವರುತ್ತಿತ್ತು, ಮಗ್ಳೆ ಹೆಣ್ಮಕ್ಕಳು ಹೃದಯ ಒಳ್ಳುಕಲ್ಲು ಇದ್ದಂಗೆ, ನಾವೇನ್ ಪದಾರ್ಥ ಹಾಕ್ತು ಅದನ್ನ ತಿರುಳು ಸಮೇತ ಅರೆದು ರುಚಿಯಾಗಿ ಮಾಡ್ತ ಬದುಕನ್ನ, ನೀನು ನಿನ್ನಮ್ಮನ ತರ ದ್ವಂದದಲ್ಲಿ ಬದುಕ್ಲೆ, ನನ್ ತರ ಎಲ್ಲದನ್ನು ಒಪ್ಕ್ಕ್ಯಂಡು ಬದುಕ್ಲೆ, ಜೀವ್ನ ಅಂದಮೇಲೆ ಎಲ್ಲದು ಇರ್ತು, ನಿನ್ನ ಚಿಕಪ್ಪದಿಕ್ಕಳು ಇವತ್ತು ಬತ್ವಡ ಊಟಕ್ಕೆ, ರೆಡಿ ಮಾಡನ ಏಳು, ಸೂರ್ಯನ್ನ ಕರಿ, ಪೂಜೆ ಮಾಡ್ಲಿ ಅವ, ಆ ಕಾಲಕ್ಕೆ ಆ ನಿಯಮಗಳು ಈ ಕಾಲಕ್ಕೆ ಇದೆ ಸತ್ಯ, ಹತ್ತು ವರುಷಕ್ಕೊಂದ್ಸಾರಿ ಸಮಾಜದ ಕಟ್ಟಳೆ ಎಲ್ಲ ಅಷ್ಟಷ್ಟು ಬದಲಾಗ್ತಾ ಹೋಗ್ತು, ಹೊಸದೆಷ್ಟೆ ಬಂದರು ಹಳತು ಚೂರುಪಾರು ಇರವು, ಅವಾಗ್ಲೆ ಚೆನ್ನ " ಅಂತ ಮುಗುಳ್ನಕ್ಕ ಅಪ್ಪನ ಕಣ್ಣಲ್ಲಿ ಅಮ್ಮನ ಹೊಸ ಅವತಾರ ಕಂಡು ಕಣ್ಣು ತುಂಬಿತು ನಕ್ಷತ್ರ ಳಿಗೆ